ಸೋಮವಾರ, ಸೆಪ್ಟೆಂಬರ್ 9, 2013

ಜಗದಗಲ ಮುಗಿಲಗಲ

ನೀನಿರಿಸಿದ ಮನದಲ್ಲಿ ನಾನಂಜೆನಯ್ಯ.
ಮನವು ಮಹಾಘನಕ್ಕೆ ಶರಣಾಗತಿವೊಕ್ಕುದಾಗಿ!
ನೀನಿರಿಸಿದ ಧನದಲ್ಲಿ ನಾನಂಜೆನಯ್ಯ,
ಧನವು ಸತಿಸುತಮಾತಾಪಿತರಿಗೆ ಹೋಗದಾಗಿ!
ನೀನಿರಿಸಿದ ತನುವಿನಲ್ಲಿ ನಾನಂಜೆನಯ್ಯ,
ಸರ್ವಾರ್ಪಿತದಲ್ಲಿ ತನು ನಿಯತಪ್ರಸಾದಭೋಗಿಯಾಗಿ!
ಇದು ಕಾರಣ ವೀರಧೀರ ಸಮಗ್ರನಾಗಿ
ಕೂಡಲಸಂಗಮದೇವಯ್ಯ ನಿಮಗಾನಂಜೆನು
ಹುಸಿಯಿಂದ ಜನಿಸಿದೆನಯ್ಯ
ಮರ್ತ್ಯಲೋಕದೊಳಯಿಂಕೆ!
ಹುಸಿಯಿಂದ ಲಿಂಗವ ಹೆಸರುಗೊಂಡು ಕರೆದೆನಯ್ಯ!
ಅದು ಎನಗೆ ಭಾವವೂ ಅಲ್ಲದೆ
ನಿರ್ಭಾವವೂ ಅಲ್ಲದೆ ನಿಂದಿತ್ತಯ್ಯ!
ಅದರ ಅವಯವಂಗಳೆಲ್ಲವು ಜಂಗಮವಯ್ಯ!
ಅದಕ್ಕೆ ಎನ್ನ ಉಳ್ಳ ಸಯದಾನವ ಮಾಡಿ ನೀಡಿದೆನಯ್ಯ,
ಆ ಪ್ರಸಾದಕ್ಕೆ ಶರಣೆಂದೆನಯ್ಯ!
ಅದು ಸಾರವೂ ಅಲ್ಲ, ನಿಸ್ಸಾರವೂ ಅಲ್ಲ!
ಆ ಪ್ರಸಾದದಲ್ಲಿ ನಾನೇ ತದ್ಗತನಾದೆ ಕಾಣಾ
ಕೂಡಲಸಂಗಮದೇವ


ಜಗದಗಲ ಮುಗಿಲಗಲ

ಜಗದಗಲ ಮುಗಿಲಗಲ
ಮಿಗೆಯಗಲ ನಿಮ್ಮಗಲ!
ಪಾತಾಳದಿಂದವತ್ತತ್ತ ನಿಮ್ಮ ಶ್ರೀಚರಣ!
ಬ್ರಹ್ಮಾಂಡದಿಂದವತ್ತತ್ತ ನಿಮ್ಮ ಶ್ರೀಮಕುಟ!
ಅಗಮ್ಯ ಅಪ್ರಮಾಣ
ಅಗೋಚರ ಅಪ್ರತಿಮಲಿಂಗವೇ,
ಕೂಡಲಸಂಗಮದೇವಯ್ಯ,
ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ